ವರದಿ : ದಿನೇಶ್ ರಾಯಪ್ಪನಮಠ
ನವದೆಹಲಿ : ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿ ಮಾಡಿ, ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಆಗುವ ಸಮಸ್ಯೆಗಳ ಹಾಗೂ ಮಾರ್ಪಾಡಿನ ಬಗ್ಗೆ ಚರ್ಚಿಸಿದರು.
ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಆಗುವ ಸಮಸ್ಯೆಗಳ ಬಗ್ಗೆ ಹಾಗೂ ಈ ಕೆಳಗಿನಂತೆ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದರು.
Advertisement. Scroll to continue reading.
- ಕಸ್ತೂರಿ ರಂಗನ್ ವರದಿಯ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಪ್ರಸ್ತಾಪಿಸಲಾದ ಪರಿಸರ ಸೂಕ್ಷ್ಮ ಪ್ರದೇಶ ಅಡಿಯಲ್ಲಿ 1543 ಗ್ರಾಮಗಳು ಬರುತ್ತವೆ. ಅದರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 500 ಗ್ರಾಮಗಳು ಬರುತ್ತವೆ.
- ಪಶ್ಚಿಮಘಟ್ಟದ ಕಾಡಿನ ಗ್ರಾಮಗಳಲ್ಲಿ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರು ಪ್ರಕೃತಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಮನೋಭಾವ ಹೊಂದಿ ಸಂರಕ್ಷಿಸುತ್ತಿರುವ ಕಾರಣದಿಂದಲೇ ಸುಮಾರು 60% ಭೂ ಪ್ರದೇಶವು ಸಮೃದ್ಧ ಅರಣ್ಯವಾಗಿದೆ.
- ಆದ್ದರಿಂದ ವರದಿಯಲ್ಲಿ ಇರವಂತೆ ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿರುವ ಗ್ರಾಮಗಳನ್ನು ಹೊರತು ಪಡಿಸಿ, ಸಂಪೂರ್ಣ ಅರಣ್ಯ ಪ್ರದೇಶ ಮತ್ತು ಅರಣ್ಯ ಸಂರಕ್ಷಿತ ಪ್ರದೇಶಗಳಲ್ಲಿ ಮಾತ್ರ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಬೇಕು ಎಂದು ಕೋರಿದರು.
- ವರದಿಯಂತೆ, ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯಲ್ಲಿ 5 ರಿಂದ 10 ಕಿ.ಮೀ.ವರೆಗಿನ ಪ್ರದೇಶವನ್ನು ಬಫರ್ ಜೋನ್ ಎಂಬುದಾಗಿ ಘೋಷಿಸುವುದರಿಂದ, ಜನಸಾಮಾನ್ಯರಿಗೆ ತೊಂದರೆಯಾಗುವುದಷ್ಟೇ ಅಲ್ಲದೇ, ರಾಜ್ಯ ಸರ್ಕಾರದ ವತಿಯಿಂದ ಈ ಭೂ ಪ್ರದೇಶದಲ್ಲಿ ಯಾವುದೇ ರೀತಿಯ ಔದ್ಯೋಗಿಕ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ. ಆದುದರಿಂದ ಬಫರ್ ಜೋನ್ ನ್ನು ಸಂಪೂರ್ಣವಾಗಿ ಈ ವರದಿಯ ಪ್ರಸ್ತಾವನೆಯಿಂದ ಕೈಬಿಡಬೇಕು.
- ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಕರ್ನಾಟಕ ರಾಜ್ಯ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಅನುಷ್ಠಾನವನ್ನು ತಿರಸ್ಕರಿಸಿದೆ.
- ಕರ್ನಾಟಕ ರಾಜ್ಯ ಸರ್ಕಾರವು ವಿಭಿನ್ನ ನಿಲುವು ವ್ಯಕ್ತಪಡಿಸಿರುವುದರಿಂದ, ಗ್ರಾಮಗಳಲ್ಲಿ ಪರಿಸ್ಥಿತಿ ಅಧ್ಯಯನ ಮಾಡಲು, ಪ್ರತೀ ಗ್ರಾಮಗಳ ಜನರಿಂದ ದೂರುಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳನ್ನೊಳಗೊಂಡ ಟಾಸ್ಕ್ ಪೋರ್ಸ್ ಅಥವಾ ಕಾರ್ಯ ಪಡೆ ರಚಿಸಲು ಮಾನ್ಯ ಕೇಂದ್ರ ಸಚಿವರಲ್ಲಿ ವಿನಂತಿಸಿದರು.
- ತಮ್ಮ ಸಲಹೆಗಳನ್ನು ಕಸ್ತೂರಿ ರಂಗನ್ ರವರ ಕರಡು ವರದಿಯಲ್ಲಿ ಅಳವಡಿಸಿಕೊಂಡು, ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ತಪ್ಪಿಸಬೇಕೆಂದು ಕೋರಿದರು.
ಈ ಸಂದರ್ಭ ಅರಣ್ಯ ಸಚಿವ ಆನಂದ್ ಸಿಂಗ್, ಗೃಹ ಸಚಿವ ಅರಗ ಜ್ಞಾನೇಂದ್ರ, ಸಾಗರ ವಿಧಾನ ಸಭಾ ಸದಸ್ಯ ಹರತಾಳು ಹಾಲಪ್ಪ ಉಪಸ್ಥಿತರಿದ್ದರು.
ಮನವಿಯನ್ನು ಸ್ವೀಕರಿಸಿದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರಾದ ಸನ್ಮಾನ್ಯ ಭೂಪೇಂದ್ರ ಯಾದವ್ ಅವರು ಈ ಬಗ್ಗೆ ಸೂಕ್ತ ನಿರ್ಣಯವನ್ನು ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.
Advertisement. Scroll to continue reading.