ಕರಾವಳಿ

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಕಲ ಮುನ್ನೆಚ್ಚರಿಕೆ : ಜಿಲ್ಲಾಧಿಕಾರಿ ಕೂರ್ಮಾರಾವ್. ಎಂ

0

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕಮ್ರಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

 ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

 ಕೋವಿಡ್ ಸೋಂಕು ಹರಡುವುದನ್ನು ತಡೆಯಲು, ಶೀಘ್ರದಲ್ಲಿ ಕೋವಿಡ್ ಪರೀಕ್ಷೆ ನಡೆಸಬೇಕಾಗಿದ್ದು, ಕಳೆದ ವಾರದಲ್ಲಿ ಜಿಲ್ಲೆಯಲ್ಲಿ ಪ್ರತಿದಿನ 2312 ರಂತೆ 16,187 ಪರೀಕ್ಷೆ ನಡೆಸಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಪ್ರತಿದಿನ 5000 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯ ಪ್ರಸ್ತುತ ಪಾಸಿಟಿವಿಟಿ ದರ 0.4 ಇದ್ದು, ಸಕ್ರಿಯ ಪ್ರಕರಣಗಳು 88 ಇರುತ್ತವೆ ಎಂದರು.

Advertisement. Scroll to continue reading.

 ಒಂದು ವಾರದಲ್ಲಿ ಜಿಲ್ಲೆಗೆ ಕೇರಳದಿಂದ 69 ಮಂದಿ ಬಂದಿದ್ದು, ಅದರಲ್ಲಿ 9 ಪಾಸಿಟಿವ್ ಪ್ರಕರಣ ಹಾಗೂ ಮಹಾರಾಷ್ಟ್ರದಿಂದ 266 ಮಂದಿ ಅಗಮಿಸಿದ್ದು, ಅದರಲ್ಲಿ 12 ಪಾಸಿಟಿವ್ ಕಂಡು ಬಂದಿದೆ. 5 ದಿನದಿಂದ 91 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರು ಆಗಮಿಸಿದ್ದು, ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 3 ಪ್ರಯಾಣಿಕರು ಹೈ ರಿಸ್ಕ್ ದೇಶದಿಂದ ಬಂದಿದ್ದು, ಅವರ ವರದಿ ನೆಗೆಟಿವ್ ಇದ್ದು, ಅವರನ್ನು ಗೃಹ ಪ್ರತ್ಯೇಕತೆಗೆ ಒಳಪಡಿಸಿದ್ದು, 8 ನೇ ದಿನ ಮತ್ತೆ ಕಡ್ಡಾಯವಾಗಿ ಪರೀಕ್ಷೆ ಮಾಡಲಾಗುತ್ತದೆ ಎಂದರು.

 ಕೇರಳದಿಂದ ಬರುವವರಿಗೆ ಪ್ರಯಾಣ ಆರಂಭಿಸಿದ 72 ಗಂಟೆಯೊಳಗಿನ ಕೋವಿಡ್-19 ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವೇಶ ನೀಡಲಾಗುತ್ತಿದೆ ಮತ್ತು 1 ವಾರದ ಕಾಲ ನಿಗಾವಣೆಗೆ ಒಳಪಡಿಸಲಾಗುತ್ತಿದೆ. 1 ವಾರದ ನಂತರ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುವುದು. ಮಹಾರಾಷ್ಟ್ರ ದಿಂದ ಬರುವವರು ಪ್ರಯಾಣ ಆರಂಭಿಸಿದ 72 ಗಂಟೆಯೊಳಗಿನ ಕೋವಿಡ್-19 ನೆಗೆಟಿವ್ ವರದಿ ಹೊಂದಿರಬೇಕು ಮತ್ತು ಜಿಲ್ಲೆಯಲ್ಲಿ ಹೊಸದಾಗಿ ಪತ್ತೆಯಾದ ಎಲ್ಲಾ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ಗೃಹ ಪ್ರತ್ಯೇಕತೆಗೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದರು.

ಸರ್ಕಾರದ ಹೊಸ ಮಾರ್ಗಸೂಚಿಯಂತೆ ಪ್ರೌಢಶಾಲೆ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಭೋಧಕ ಸಿಬ್ಬಂದಿಗೆ ರ‍್ಯಾಂಡಮ್ ಪರೀಕ್ಷೆ ನಡೆಸಲಾಗುತ್ತಿದೆ. ಮಾಲ್ ಮತ್ತು ಮಾರುಕಟ್ಟೆಗಳಲ್ಲಿರುವ ಅಂಗಡಿ ಮುಂಗಟ್ಟುಗಳ ವರ್ತಕರು, ಎಲ್ಲಾ ಕಚೇರಿಗಳ ಸಿಬ್ಬಂದಿ, ಪಬ್ ಮತ್ತು ಬಾರ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿ, ಕಾರ್ಖಾನೆ ಸಿಬ್ಬಂದಿ, ಕ್ಯಾಟರಿಂಗ್ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು.

ಸೋಂಕು ಭಾದಿತ ವ್ಯಕ್ತಿಗಳು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುವ ಸಂದರ್ಭದಲ್ಲಿ ಬೆಡ್ ವ್ಯವಸ್ಥೆ ಮತ್ತು ಆಕ್ಸಿಜನ್ ವ್ಯವಸ್ಥೆ ಮಾಡಲು 25 ಖಾಸಗಿ ಆಸ್ಪತ್ರೆಗಳಿಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಕೋವಿಡ್ ಪರೀಕ್ಷೆ ,ಪತ್ತೆ, ಚಿಕಿತ್ಸೆ, ಲಸಿಕಾಕರಣ ಮತ್ತು ಕೋವಿಡ್ ಸಮುಚಿತ ವರ್ತನೆಗಳನ್ನು ಕಟ್ಟಿನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲಾಗಿದೆ.

Advertisement. Scroll to continue reading.

 ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು 500 ಜನರಿಗೆ ಸೀಮಿತಗೊಳಿಸಲಾಗಿದೆ. ಮಾಸ್ಕ್ ಧರಿಸದವರ ವಿರುದ್ಧ ದಂಢ ವಿಧಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಕೋವಿಡ್ ಸಮುಚಿತ ವರ್ತನೆ ಪಾಲಿಸದ ಅಂಗಡಿ ಮುಂಗಟ್ಟುಗಳಿಗೆ ದಂಢ ವಿಧಿಸುವುದು ಮತ್ತು ಲೈಸೆನ್ಸ್ ರದ್ದುಗೊಳಿಸುವ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸಾರ್ವಜನಿಕರು ಕೋವಿಡ್ ಕುರಿತಂತೆ ಅನಗತ್ಯ ಗೊಂದಲ, ಆತಂಕಕ್ಕೆ ಒಳಗಾಗದೇ ಎಚ್ಚರಿಕೆಯಿಂದ ಇರಬೇಕು. ಕೋವಿಡ್-19 ಸಮುಚಿತ ವರ್ತನೆಗಳನ್ನು ಎಲ್ಲೆಡೆ ಪಾಲಿಸಬೇಕು ಮತ್ತು 2 ಡೋಸ್ ಕೋವಿಡ್ ಲಸಿಕೆಯನ್ನು ಪಡೆಯಬೇಕು ಹಾಗೂ ರೋಗ ಲಕ್ಷಣಗಳಿದ್ದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹಾಗೂ ಜಿಲ್ಲಾಡಳಿತ ಸೂಚಿಸುವ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕೂಮರಾವ್ ಎಂ ಹೇಳಿದರು.

 ಪತ್ರಿಕಾಗೋಷ್ಟಿಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಉಪಸ್ಥಿತರಿದ್ದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com