ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಇಬ್ಬರು ಶಾಸಕರನ್ನು ಜೆಡಿಎಸ್ ಉಚ್ಛಾಟಿಸಿದೆ.
ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.
ಶಾಸಕ ಬಂಡೆಪ್ಪ ಕಾಶೆಂಪುರ ಅಧ್ಯಕ್ಷತೆಯಲ್ಲಿ ಜೆಡಿಎಸ್ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆ ನಡೆದಿದ್ದು, ಈ ವೇಳೆ ನಿರ್ಣಯ ಕೈಗೊಳ್ಳಲಾಗಿತ್ತು. ಇದಕ್ಕೆ ಪೂರಕವಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ಹೊರಡಿಸಿದ್ದಾರೆ.
Advertisement. Scroll to continue reading.
ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಿ. ಕುಪೇಂದ್ರ ರೆಡ್ಡಿ ಅವರಿಗೆ ಮತ ಚಲಾಯಿಸಬೇಕೆಂಬ ವಿಪ್ ಅನ್ನು ಇಬ್ಬರೂ ಉಲ್ಲಂಘಿಸಿದ್ದಾರೆ. ಗುಬ್ಬಿ ಶ್ರೀನಿವಾಸ್ ಅವರು ತಮ್ಮ ಪ್ರಥಮ ಪ್ರಾಶಸ್ತ್ಯದ ಮತವನ್ನು ಬಿಜೆಪಿ ಅಭ್ಯರ್ಥಿ ಲಹರ್ ಸಿಂಗ್ ಅವರಿಗೆ ಮತ್ತು ದ್ವಿತೀಯ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರಿಗೆ ನೀಡಿದ್ದರು. ಕೆ. ಶ್ರೀನಿವಾಸ ಗೌಡ ತಮ್ಮ ಪ್ರಥಮ ಪ್ರಾಶಸ್ತ್ಯದ ಮತವನ್ನು ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ಗೆ ಹಾಗೂ ದ್ವಿತೀಯ ಪ್ರಾಶಸ್ತ್ಯದ ಮತವನ್ನು ಬಿಜೆಪಿಯ ಲಹರ್ ಸಿಂಗ್ ಅವರಿಗೆ ನೀಡಿದ್ದರು ಎಂದು ಜೆಡಿಎಸ್ ಮತಗಟ್ಟೆ ಏಜೆಂಟ್ ಎಚ್.ಡಿ. ರೇವಣ್ಣ ವರದಿ ನೀಡಿದ್ದಾರೆ ಎಂಬ ಉಲ್ಲೇಖ ಉಚ್ಛಾಟನೆ ಆದೇಶದಲ್ಲಿದೆ.
ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಇಬ್ಬರೂ ಶಾಸಕರನ್ನು ಅನರ್ಹಗೊಳಿಸುವಂತೆ ವಿಧಾನಸಭೆಯ ಅಧ್ಯಕ್ಷರಿಗೆ ದೂರು ನೀಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ಬಗ್ಗೆ ಎರಡು ದಿನಗಳೊಳಗೆ ದೂರು ಸಲ್ಲಿಸುತ್ತೇವೆ ಎಂದು ಬಂಡೆಪ್ಪ ಕಾಶೆಂಪುರ ಮಾಹಿತಿ ನೀಡಿದ್ದಾರೆ.
Advertisement. Scroll to continue reading.