ಉಡುಪಿ : ಹಿರಿಯ ಪತ್ರಕರ್ತ, ಸಾಹಿತಿ ಶೇಖರ ಅಜೆಕಾರು(54) ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನವರಾದ ಶೇಖರ್ ಅಜೆಕಾರು ಇಂದು ಬೆಳಗ್ಗೆ ಮನೆಯಲ್ಲಿರುವಾಗ ಕುಸಿದು ಬಿದ್ದಿದ್ದರು. ತಕ್ಷಣ ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮುಂಬೈನ ‘ಕರ್ನಾಟಕ ಮಲ್ಲ’ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ಪತ್ರಿಕಾ ವೃತ್ತಿ ಆರಂಭಿಸಿದ್ದ ಅವರು ಮಂಗಳೂರಿನ ಜನವಾಹಿನಿ, ಉಷಾಕಿರಣ- ಪ್ರಜಾವಾಣಿ -ಕನ್ನಡಪ್ರಭ, ಡೈಜಿ ವರ್ಲ್ಡ್- ಕುಂದಪ್ರಭ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು.
ಕಂಬಳ ಸೇರಿದಂತೆ ಹಲವು ವಿಚಾರಗಳ ಕುರಿತು ಸುಮಾರು 22 ಪುಸ್ತಕಗಳನ್ನು ಬರೆದಿರುವ ಇವರು, ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸ್ಥಾಪಕರಾಗಿದ್ದರು. ಕಾರ್ಯಕ್ರಮ ಸಂಘಟನೆ ಮೂಲಕ ಸಾಧಕರಿಗೆ, ಸಾಹಿತಿಗಳಿಗೆ ಮನೆಯಂಗಳದಲ್ಲಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತಿದ್ದರು.
Advertisement. Scroll to continue reading.
ಶೇಖರ್ ಅಜೆಕಾರು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ, ಶಿಖಾ ಭಾರತ ಪ್ರಶಸ್ತಿ, ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿ, ಕೃಷಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿ, ಪುತ್ರನನ್ನು ಅಗಲಿದ್ದಾರೆ.