ಉಡುಪಿ : ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್ ಗೆ ರೂ.2183 ಹಾಗೂ ಗ್ರೇಡ್ ಎ ಭತ್ತಕ್ಕೆ ರೂ.2203 ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಿದ್ದು, ಜಿಲ್ಲೆಯ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 25 ಕ್ವಿಂಟಾಲ್ ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತವನ್ನು ನಿಯಮಾನುಸಾರ ಖರೀದಿಸಲು ಮತ್ತು ರೈತರಿಗೆ ನೊಂದಣಿ ಕೇಂದ್ರಗಳನ್ನು ತೆರೆದು ನೊಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವನ್ನು ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದ್ದು, ಸದರಿ ಏಜೆನ್ಸಿಯವರು ಡಿಸೆಂಬರ್ 31 ರ ವರೆಗೆ ರೈತರಿಂದ ಭತ್ತ ಖರೀದಿಸಲು ನೊಂದಣಿ ಕಾರ್ಯಗಳನ್ನು ಹಾಗೂ 2024 ರ ಮಾರ್ಚ್ 31 ರ ಅವಧಿಯೊಳಗೆ ಭತ್ತ ಖರೀದಿ ಕಾರ್ಯಗಳನ್ನು ಕೈಗೊಳ್ಳಲಿದ್ದಾರೆ.
Advertisement. Scroll to continue reading.
ಉಡುಪಿಯ ಎಪಿಎಂಸಿ ಯಾರ್ಡ್, ಕುಂದಾಪುರದ ಕೋಟೇಶ್ವರ ಹಾಗೂ ಕಾರ್ಕಳದ ಎಪಿಎಂಸಿ ಯಾರ್ಡ್ ಕೆ.ಎಫ್.ಸಿ.ಎಸ್.ಸಿ ಗೋದಾಮುಗಳಲ್ಲಿ ನೋಂದಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯಲ್ಲಿ ಭತ್ತ ಬೆಳೆದಿರುವ ರೈತರು ಕೃಷಿ ಇಲಾಖೆಯಿಂದ ನೀಡಿರುವ ಫ್ರೂಟ್ಸ್ ದತ್ತಾಂಶದಲ್ಲಿ ಸೇರ್ಪಡೆಗೊಂಡು ಮತ್ತು ಸೇರ್ಪಡೆಗೊಂಡಿರುವ ಫ್ರೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆ ಹಾಗೂ ಆಧಾರ್ ಜೋಡಣೆಯ ಬ್ಯಾಂಕ್ ಖಾತೆಯ ಮಾಹಿತಿಯೊಂದಿಗೆ ನೊಂದಣಿ ಕೇಂದ್ರದಲ್ಲಿ ನೋಂದಾಯಿಸಿಕೊಂಡು, ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.