ಬೆಂಗಳೂರು : ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆಯನ್ನು’ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ಶುಕ್ರವಾರ ಮಹತ್ವದ ನಿರ್ಣಯ ಕೈಗೊಂಡಿದೆ.
ಶುಕ್ರವಾರ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾಯಿದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಲು ನಿರ್ಧರಿಸಲಾಗಿದೆ. ನಿರ್ಧಾರಕ್ಕೆ ರಾಜ್ಯಪಾಲರ ಅನುಮೋದನೆ ಬಿದ್ದ ತಕ್ಷಣದಿಂದ ತಿದ್ದುಪಡಿ ನಿಯಮ ಜಾರಿಯಾಗಲಿದೆ.
2023ರ ಮಾರ್ಚ್ ತಿಂಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ 2022ರ ಸೆಕ್ಷನ್ 17 (6) ರಲ್ಲಿ ನಾಮಫಲಕಗಳಲ್ಲಿನ ಅರ್ಧ ಭಾಗವು (ಶೇ.50) ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿತ್ತು. ಇದೀಗ ನಿಯಮಕ್ಕೆ ತಿದ್ದುಪಡಿ ತಂದು ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಲಾಗಿದೆ.
Advertisement. Scroll to continue reading.
ಹೀಗಿದೆ ತಿದ್ದುಪಡಿ :
ಇನ್ನು ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿನ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರಬೇಕು ಎಂದು ಸ್ಪಷ್ಟಪಡಿಸಲಾಗಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6) ಪ್ರಕಾರ ಶೇ.50ರಷ್ಟಿದ್ದ ಕನ್ನಡ ಬಳಕೆ ಶೇ.60ರಷ್ಟು ಮಾಡಲಾಗಿದೆ.
Advertisement. Scroll to continue reading.
ಸೆಕ್ಷನ್ 7(2)ಗೆ ತಿದ್ದುಪಡಿ ಮಾಡಿ ರಾಜ್ಯ ಮಟ್ಟದ ಸಮಿತಿಗೆ ಸಂಚಾಲಕರಾಗಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರನ್ನು ಸದಸ್ಯರಾಗಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯನ್ನು ಸಂಚಾಲಕರನ್ನಾಗಿ ನೇಮಿಸಲು ತಿದ್ದುಪಡಿ ಮಾಡಲಾಗಿದೆ.
ಕನ್ನಡ ಬರಹವು ನಾಮಫಲಕದ ಮೇಲ್ಭಾಗದಲ್ಲೇ ಇರಬೇಕು.
Advertisement. Scroll to continue reading.