ಉಡುಪಿ : ಸ್ವಾಮಿ ವಿವೇಕಾನಂದರ ತತ್ವ ಮತ್ತು ಆದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಯುವ ಜನರು ಅದನ್ನು ಅರ್ಥೈಸಿಕೊಂಡು ಅದನ್ನು ಪಾಲಿಸಿದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಹೇಳಿದರು.
ಅವರು ಇಂದು ನಗರದ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ. ಎ.ವಿ ಹಾಲ್ನಲ್ಲಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಜಯಂತಿ ಪ್ರಯುಕ್ತ ನಡೆದ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸ್ವಾಮಿ ವಿವೇಕಾನಂದರು ಯುವ ಜನತೆಗೆ ಮಾದರಿಯಾಗಿದ್ದು, ಪ್ರತಿಯೊಬ್ಬರು ಅವರ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜೀವನದಲ್ಲಿ ಗುರಿ ಹೊಂದುವುದು ಮುಖ್ಯವಾಗಿದ್ದು, ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಗುರಿಯನ್ನು ತಲುಪುವ ಕಡೆ ಗಮನಹರಿಸಬೇಕು ಎಂದ ಅವರು, ಪ್ರತಿಯೊಂದು ಕೆಲಸಕ್ಕೂ ಅದರದ್ದೇ ಆದ ಜವಾಬ್ದಾರಿ ಇದ್ದು, ಯಾವುದೇ ಕೆಲಸವನ್ನು ಕೈಗೊಂಡರು ಅದನ್ನು ಪ್ರಾಮಾಣಿಕತೆಯಿಂದ ಮಾಡಬೇಕು ಎಂದರು.
Advertisement. Scroll to continue reading.
ಭಾರತೀಯ ರೆಡ್ಕ್ರಾಸ್ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ವಿವೇಕಾನಂದರ ಚಿಂತನೆಗಳು ಸರ್ವಕಾಲಿಕ ಮೌಲ್ಯವನ್ನು ಹೊಂದಿದೆ. ವಿವೇಕಾನಂದರು ತಮ್ಮ ಜೀವನದಲ್ಲಿ ಯುವಜನತೆಗಾಗಿ ಮಾಡಿದ ಕಾರ್ಯಗಳು ಅದ್ಭುತ. ಸ್ವಾಮಿ ವಿವೇಕಾನಂದರ ಕುರಿತ ಪುಸ್ತಕಗಳನ್ನು ಓದಿ ಅವರಲ್ಲಿರುವ ಅಧ್ಯಾತ್ಮ, ನಿಷ್ಠೆ, ದೇಶಭಕ್ತಿ ಹಾಗೂ ಮಾನವೀಯತೆ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಚಿಂತಕ ಡಾ. ಪ್ರಸಾದ್ ರಾವ್ ಉಪನ್ಯಾಸ ನೀಡಿ, ಭಾರತೀಯ ಸಂವಿಧಾನದ ಮೌಲ್ಯಗಳನ್ನು ವಿವೇಕಾನಂದರ ಚಿಂತನೆಯಲ್ಲಿ ಕಾಣಬಹುದು. ವ್ಯಕ್ತಿಯೇ ದೈವತ್ವಕ್ಕೇರುವುದನ್ನು ಅವರು ಪ್ರತಿಪಾದಿಸಿದ್ದಾರೆ. ವಿವೇಕಾನಂದ, ಗಾಂಧೀಜಿ ಮತ್ತು ಅಂಬೇಡ್ಕರವರು ಭಾರತೀಯ ಆಧುನಿಕ ಚಿಂತನೆಯ ಪ್ರತೀಕ. ದೇಶದಲ್ಲಿ ಧರ್ಮಗಳು ದೇಹ ಹಾಗೂ ಆತ್ಮದಂತೆ ಸಮ್ಮಿಲನಗೊಂಡಿದೆ. ಅವುಗಳು ಒಗ್ಗಟ್ಟಾಗಿ ಬದುಕಬೇಕೆಂಬುವುದು ಸ್ವಾಮೀ ವಿವೇಕಾನಂದರ ಆಶಯವಾಗಿತ್ತು ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಭಾಸ್ಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾಮಿ ವಿವೇಕಾನಂದರು ಸಮಾಜದಲ್ಲಿ ಕಂಡುಬರುವ ಅಸಮಾನತೆ, ಸಾಮಾಜಿಕ ಮೌಢ್ಯಗಳ ವಿರುದ್ಧ ಧ್ವನಿ ಎತ್ತಿದರು. ಜಾತಿ ವ್ಯವಸ್ಥೆಯಲ್ಲಿ ಇದ್ದ ವಿಚಿತ್ರ ಪದ್ಧತಿಗಳ ಕುರಿತಾಗಿ ಅವರು ನೀಡಿರುವ ವಿವೇಕ ವಿವೇಚನ ಉಪನ್ಯಾಸಗಳು ಪ್ರಸ್ತುತ ಕಾಲಘಟ್ಟದಲ್ಲಿಯೂ ಮೌಢ್ಯಗಳ ನಿರ್ಮೂಲನೆ ಸಹಕಾರಿಯಾಗಿದೆ ಎಂದರು.
ರೆಡ್ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿದರು.
Advertisement. Scroll to continue reading.
ವಿವೇಕಾನಂದ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಉಷಾ ಕಿರಣ್, ಡೀನ್ ಪ್ರೊ. ಶ್ರೀಧರ ಪ್ರಸಾದ್ ರೆಡ್ಕ್ರಾಸ್ ಖಜಾಂಚಿ ರಮಾದೇವಿ, ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ. ನಿಕೇತನ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರೆ, ಎನ್.ಎಸ್.ಎಸ್ ಅಧಿಕಾರಿ ವಿದ್ಯಾ ಡಿ ವಂದಿಸಿದರು.
Advertisement. Scroll to continue reading.