ಉಡುಪಿ : ಶಿಕ್ಷಣದ ವಿಷಯದಲ್ಲಿ ರಾಜ್ಯದಲ್ಲೇ ಸುಪ್ರಸಿದ್ಧವಾದ ನಮ್ಮ ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಡೆಸಿದ ಹೋರಾಟದ ಪರಿಣಾಮವಾಗಿ ಸರಕಾರದ ಮೇಲೆ ಉಂಟಾದ ಒತ್ತಡದಿಂದಾಗಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಈ ವರ್ಷದ ವೇಳೆಗೆ ಪ್ರಾರಂಭವಾಗಲಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇಲ್ಲಿ ಪ್ರಮುಖ ಆಕ್ಷೇಪವೇನೆಂದರೆ ಡಾ. ಸುಧಾಕರ್ ಅವರು ಪರಿಪೂರ್ಣವಾಗಿ ಸರ್ಕಾರದ ಅಧೀನದಲ್ಲಿ ಕಾಲೇಜು ಸ್ಥಾಪಿಸುವ ಬದಲಾಗಿ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸುವ ಕುರಿತು ಹೇಳಿರುತ್ತಾರೆ. ಜಿಲ್ಲೆಯ ಜನರ ಬೇಡಿಕೆಯ ಅನುಸಾರವಾಗಿ ಪರಿಪೂರ್ಣವಾದ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಒತ್ತಾಯಿಸುತ್ತೇವೆ. ನಮ್ಮ ಬೇಡಿಕೆ ಈಡೇರಿಸುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಮತ್ತು ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜನ್ನು ನಾವು ಸ್ವೀಕರಿಸುವುದಿಲ್ಲ. ಜಿಲ್ಲೆಯ ಜನರ ಹಕ್ಕಾದ ಸರಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಎಲ್ಲಾ ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು, ಪ್ರಗತಿಪರ ಚಿಂತಕರು ಮತ್ತು ಜನಸಾಮಾನ್ಯರು ನಮ್ಮೊಂದಿಗೆ ಕೈಜೋಡಿಸುವಂತೆ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷರಾದ ಅಸೀಲ್ ಜಿಲ್ಲೆಯ ಜನತೆಗೆ ಕರೆ ನೀಡಿದ್ದಾರೆ.