ಬೆಳಗಾವಿ: ನಟ ಪುನೀತ್ ರಾಜ್ ಕುಮಾರ್ ಅವರ ಅಗಲಿಕೆಯ ನೋವನ್ನು ಇಡೀ ಕರುನಾಡೇ ಅನುಭವಿಸುತ್ತಿದೆ. ಬೆಳಗಾವಿ ಅಧಿವೇಶನದಲ್ಲೂ ನಟ ಪುನೀತ್ ರಾಜ್ಕುಮಾರ್ ಅವರ ನೆನೆಪಿಸಿಕೊಳ್ಳಲಾಯಿತು.
ಈಗಾಗಲೇ ಅಮೋಘ ನಟನಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಈ ಪ್ರಶಸ್ತಿ ಪ್ರಧಾನಕ್ಕಾಗಿ ಶೀಘ್ರವೇ ದಿನಾಂಕ ಘೋಷಣೆ ಮಾಡಲಾಗುತ್ತದೆ. ಪದ್ಮಶ್ರೀ ಪ್ರಶಸ್ತಿಗೂ ಹೆಸರು ಶಿಫಾರಸ್ಸು ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಮೊದಲ ದಿನದ ಅಧಿವೇಶನದ ಸಂದರ್ಭದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುತ್ತಾ ಮಾತನಾಡಿದಂತ ಅವರು, ನಟ ಪುನೀತ್ ರಾಜ್ ಕುಮಾರ್ ಅವರಿಗೆ ಅವರೇ ಸರಿ ಸಾಟಿ. ಅವರಿಗೆ ಮತ್ತೊಬ್ಬರು ಸರಿಸಾಟಿಯಿಲ್ಲ. ಸರ್ಕಾರ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಿದೆ. ಈ ಪ್ರಶಸ್ತಿ ನೀಡೋದಕ್ಕೆ ಶೀಘ್ರವೇ ದಿನಾಂಕ ನಿಗದಿ ಪಡಿಸಿ, ಘೋಷಿಸಲಾಗುತ್ತದೆ ಎಂದರು.

ಇನ್ನೂ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ಪ್ರಶಸ್ತಿ ಅಷ್ಟೇ ಅಲ್ಲ, ಪದ್ಮಶ್ರೀ ಪ್ರಶಸ್ತಿಯನ್ನು ನೀಡುವಂತೆ ರಾಜ್ಯ ಸರ್ಕಾರ ಹಾಗೂ ಅವರ ಅಭಿಮಾನಿಗಳು, ಕರುನಾಡಿನ ಕೋರಿಕೆಯಾಗಿದ್ದು, ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಲಿದೆ. ಪದ್ಮಶ್ರೀ ನೀಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದರು.
