ಬೆಂಗಳೂರು:. ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಅವರು ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಪುನೀತ್ ರಾಜ್ ಕುಮಾರ್ ಕೆ ಎಂ ಎಫ್ ಹಾಗೂ ಶಿಕ್ಷಣ ಕ್ಷೇತ್ರದ ರಾಯಭಾರಿ ಆಗಿದ್ದರು. ಯಾವುದೇ ಸಂಭಾವನೆ ಪಡೆಯುತ್ತಿರಲಿಲ್ಲ. ಭಾನುವಾರ ಜಿಲ್ಲೆಗೆ ಒಬ್ಬರಂತೆ ಸಹಕಾರ ರತ್ನ ಪ್ರಶಸ್ತಿ ನೀಡಲಾಗುವುದು ಎಂದರು.

ಬೆಂಗಳೂರಿನ ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಮಾ.20 ರಂದು ಬೆಳಗ್ಗೆ 11 ಗಂಟೆಗೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಮಾರಂಭ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.
ಪ್ರಶಸ್ತಿಗೆ 100 ಜನರ ಪಟ್ಟಿ ಬಂದಿದ್ದು, CM ಜೊತೆ ಚರ್ಚೆ ಮಾಡಿ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಪ್ರಶಸ್ತಿಗೆ ಅರ್ಜಿ ಹಾಕದೆ, ಸಹಕಾರಿ ಇಲಾಖೆಯಲ್ಲಿ ಸೇವೆ ಸಲ್ಲಿಸಿದವರಿಗೂ ಸಹಕಾರಿ ರತ್ನ ಪ್ರಶಸ್ತಿ ನೀಡಲಾಗುವುದು ಎಂದರು.
ಸಹಕಾರಿ ರತ್ನ ಪ್ರಶಸ್ತಿಯು 15 ಗ್ರಾಂ ಚಿನ್ನ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಪ್ರತಿ ವರ್ಷ ಆರು ಮಂದಿಗೆ ಪ್ರಶಸ್ತಿ ನೀಡುತ್ತಿದ್ದೆವು. ಆದರೆ, ಕಳೆದ ವರ್ಷ ಜಿಲ್ಲೆಗೆ ಒಬ್ಬರು ಎಂದು ನಿರ್ಧರಿಸಿದ್ದು, ಈ ಹಿನ್ನಲೆಯಲ್ಲಿ 40 ರಿಂದ 50 ಮಂದಿಗೆ ಪ್ರಶಸ್ತಿ ನೀಡಲಾಗುವುದು ಎಂದರು.

