ಬೆಂಗಳೂರು: ಪಿ ಎಸ್ ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ದಿವ್ಯಾರನ್ನು ಪುಣೆಯಿಂದ ಕಲಬುರಗಿಗೆ ಕರೆತರಲಾಗುತ್ತಿದೆ. 10 ಗಂಟೆಗೆ ಅವರು ಕಲಬುರಗಿ ತಲುಪಬಹುದು ಎಂದು ಸಿಐಡಿ ಪೊಲೀಸರು ತಿಳಿಸಿದ್ದಾರೆ. ಕಲಬುರಗಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಜ್ಞಾನಜ್ಯೋತಿ ಶಾಲೆಯಲ್ಲಿ ಅಕ್ರಮ ನಡೆದಿತ್ತು ಎಂದು ತನಿಖೆ ವೇಳೆ ತಿಳಿದುಬಂದಿತ್ತು. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡವು ದಿವ್ಯಾ ಹಾಗರಗಿ ಅವರನ್ನು ವಶಕ್ಕೆ ಪಡೆದುಕೊಂಡಿದೆ.
ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪಿಎಸ್ಐ ಪರೀಕ್ಷೆ ಅಕ್ರಮ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ದಿವ್ಯಾ ಹಾಗರಗಿ ಮನೆ ಮೇಲೆ ದಾಳಿ ನಡೆಸಿದ್ದ ಸಿಐಡಿ ತಂಡವು ತನಿಖೆಗೆ ಅಸಹಕಾರ, ಆರೋಪಿಗಳ ನಾಪತ್ತೆಗೆ ಬೆಂಬಲ ಆರೋಪದ ಮೇಲೆ ರಾಜೇಶ್ ಹಾಗರಗಿಯನ್ನ ಬಂಧಿಸಿದ್ದರು. ನಾಪತ್ತೆಯಾಗಿದ್ದ ದಿವ್ಯಾ ಹಾಗರಗಿಗಾಗಿ ಕಳೆದ 18 ದಿನಗಳಿಂದ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದರು.
ಕಲಬುರಗಿ ಜಿಲ್ಲೆಯಲ್ಲಿ ಈಕೆ ಪ್ರಭಾವಿ ಬಿಜೆಪಿ ಮುಖಂಡೆ. ದಿಶಾ ಕಮಿಟಿಯ ಸದಸ್ಯೆ, ರಾಜ್ಯ ನರ್ಸಿಂಗ್ ಬೋರ್ಡ್ ಸದಸ್ಯೆ ಕೂಡಾ ಆಗಿದ್ದಾರೆ. ಈ ಹಿಂದೆ ಕಲಬುರಗಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದರು.

ದಿವ್ಯಾ ಹಾಗರಗಿಯೇ ತಮ್ಮ ಸಿಬ್ಬಂದಿ ಮೇಲೆ ಒತ್ತಡ ಹೇರಿದ್ದರು ಎಂಬ ಆರೋಪವೂ ಕೇಳಿ ಬಂದಿತ್ತು. ಪರೀಕ್ಷೆ ಮುಗಿದ ಮೇಲೆ ಒಎಂಆರ್ ಶೀಟ್ನಲ್ಲಿ ಖಾಲಿ ಬಿಟ್ಟಿರೋ ಪ್ರಶ್ನೆಗಳಿಗೆ ಉತ್ತರ ಬರೆಸಿದ್ದಾರೆ ಎನ್ನುವುದು ಇವರ ವಿರುದ್ಧ ಕೇಳಿ ಬಂದಿದ್ದ ಪ್ರಮುಖ ದೂರು. ಇದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಹತ್ತು ಜನ ಅಭ್ಯರ್ಥಿಗಳು ಪಿಎಸ್ಐ ಆಗಿ ನೇಮಕವಾಗಿದ್ದರು. ಹತ್ತು ಅಭ್ಯರ್ಥಿಗಳು ಅಕ್ರಮವಾಗಿ ಪರೀಕ್ಷೆ ಬರೆದಿರೋ ಆರೋಪವಿದೆ. ಈ ಪೈಕಿ ಈಗಾಗಲೇ ನಾಲ್ವರು ಅಭ್ಯರ್ಥಿಗಳು ಮತ್ತು ಮೂರು ಜನ ಕೊಠಡಿ ಮೇಲ್ವಿಚಾರಕಿಯರನ್ನು ಪೊಲೀಸರು ಬಂಧಿಸಿದ್ದಾರೆ.
2021 ರ ಆಗಸ್ಟ್ 3 ರಂದು ರಾಜ್ಯಾದ್ಯಂತ ಪರೀಕ್ಷೆ ನಡೆದಿತ್ತು. 2022ರ ಜನವರಿ 19 ರಂದು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕೂಡಾ ಪ್ರಕಟ ಮಾಡಲಾಗಿತ್ತು. ನೇಮಕಾತಿಯಲ್ಲಿ ಗೋಲ್ಮಾಲ್ ಆಗಿದೆ ಎಂದು ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ದೂರು ನೀಡಿದ್ದರು. ದೂರು ಬಂದ ಹಿನ್ನೆಲೆ ಗೃಹ ಇಲಾಖೆಯಿಂದ ತನಿಖೆಯನ್ನು ಸಿಐಡಿಗೆ ನೀಡಿತ್ತು.
