ತಿರುವನಂತಪುರಂ : ವರದಕ್ಷಿಣೆ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ವಿಸ್ಮಯ ನಾಯರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಕೆ ಪತಿ ಕಿರಣ್ ಕುಮಾರ್ ಅವರನ್ನು ದೋಷಿ ಎಂದು ಕೇರಳದ ಕೊಲ್ಲಂನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.
ಪ್ರಕರಣದ ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿದ್ದ ಕೇರಳದ ಕೊಲ್ಲಂನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ, 304(ಬಿ), 498(ಎ), 306 ಐಪಿಸಿ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ 3,4 ಆರೋಪದಡಿ ಪತಿಯನ್ನು ದೋಷಿ ಎಂದು ತೀರ್ಪು ನೀಡಿದೆ.
ವಿಚಾರಣೆ ವೇಳೆ 42 ಸಾಕ್ಷಿಗಳು, 102 ದಾಖಲೆಗಳು ಮತ್ತು ಹಲವಾರು ಕರೆ ದಾಖಲೆಗಳನ್ನು ನ್ಯಾಯಾಲಯದಲ್ಲಿ ಪರಿಶೀಲಿಸಲಾಗಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಹೇಳಿದ್ದಾರೆ.

ನ್ಯಾಯಾಲಯದ ಮುಂದೆ ಸಲ್ಲಿಸಿದ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿ ಪತಿ ವಿರುದ್ಧದ ಆರೋಪಗಳನ್ನು ಹೊರಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಾದಿಸಿದೆ ಎಂದು ಅವರು ಹೇಳಿದರು.
ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ವಿಸ್ಮಯಾ, 2021 ರ ಜೂನ್ 22 ರಂದು ಕೊಲ್ಲಂ ಜಿಲ್ಲೆಯ ಸಾಸ್ತಮಕೋಟಾದಲ್ಲಿ ತನ್ನ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಸಹಾಯಕ ಮೋಟಾರು ವಾಹನ ನಿರೀಕ್ಷಕರಾಗಿದ್ದ ಕಿರಣ್ ಕುಮಾರ್ ಅವರನ್ನು ಬಂಧಿಸಿದ ಬಳಿಕ ಅವರನ್ನು ರಾಜ್ಯ ಸರ್ಕಾರ ಸೇವೆಯಿಂದ ವಜಾಗೊಳಿಸಿತ್ತು.
ವರದಕ್ಷಿಣೆ ಕಿರುಕುಳದಿಂದ ವಿಸ್ಮಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕೇರಳ ಪೊಲೀಸರು 500 ಪುಟಗಳ ಚಾರ್ಜ್ ಶೀಟ್ ನಲ್ಲಿ ಹೇಳಿದ್ದರು. ಸಂತ್ರಸ್ತೆಯ ಪತಿ ಎಸ್. ಕಿರಣ್ ಕುಮಾರ್ ವಿರುದ್ಧ ಐಪಿಸಿ ಅಡಿಯಲ್ಲಿ ಕ್ರಮವಾಗಿ ವರದಕ್ಷಿಣೆ ಸಾವು, ವರದಕ್ಷಿಣೆ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆ, ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು ಮತ್ತು ಕ್ರಿಮಿನಲ್ ಬೆದರಿಕೆಯ ಅಪರಾಧಗಳಿಗಾಗಿ ಸೆಕ್ಷನ್ 304 ಬಿ, 498 ಎ, 306, 323 ಮತ್ತು 506 ರ ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು.

