ನವದೆಹಲಿ : ಜಾರಿ ನಿರ್ದೇಶನಾಲಯದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿಯಲ್ಲಿರುವ ನ್ಯಾಷನಲ್ ಹೆರಾಲ್ಡ್ ಕಚೇರಿಯನ್ನು ಸೀಲ್ ಮಾಡಲಾಗಿದೆ. ಅಲ್ಲದೇ ಏಜೆನ್ಸಿಯ ಪೂರ್ವಾನುಮತಿಯಿಲ್ಲದೆ ಆವರಣವನ್ನು ತೆರೆಯಬಾರದು ಎಂದು ಸೂಚಿಸಲಾಗಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ, ದಿನಕ್ಕೊಂದು ತಿರುವನ್ನು ಪಡೆಯುತ್ತಿದ್ದು, ಇದೇ ಪ್ರಕರಣದಲ್ಲಿ ಈಗಾಗಲೇ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಸರಣಿ ವಿಚಾರಣೆಯನ್ನು ಇಡಿ ಅಧಿಕಾರಿಗಳು ನಡೆಸಿದ್ದರು.
ಕಾಂಗ್ರೆಸ್ನ ಇತರೆ ನಾಯಕರನ್ನು ಇಡಿ ವಿಚಾರಣೆ ನಡೆಸಿತ್ತು. ಹೀಗಾಗಿ ಇಡಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಿಂದ ದೇಶಾದ್ಯಂತ ಪ್ರತಿಭಟನೆ ಕೂಡ ನಡೆಸಲಾಗಿತ್ತು.

ಇದೀಗ ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಇಡಿ ಅಧಿಕಾರಿಗಳು ಬೀಗಮುದ್ರೆ ಜಡಿದಿದ್ದಾರೆ. ಅಲ್ಲದೇ ತಮ್ಮ ಪೂರ್ವಾನುಮತಿ ಇಲ್ಲದೆ ಕಚೇರಿಯ ಆವರಣವನ್ನು ತೆರೆಯದಂತೆ ಖಡಕ್ ಸೂಚನೆಯನ್ನೂ ನೀಡಲಾಗಿದೆ.
