ನವದೆಹಲಿ : ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ ನೀಡಿದ್ದಾರೆ.
ತೀವ್ರ ವಿಷಾದಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.
ಪಕ್ಷದ ನಾಯಕತ್ವ ಕಾರ್ಯನಿರ್ವಹಿಸುತ್ತಿರುವ ರೀತಿ ಬದಲಾಗಬೇಕು ಎಂದು ಆಗ್ರಹಿಸಿ ಪತ್ರ ಬರೆದಿದ್ದ ಜಿ-23 ಸಮಿತಿಯಲ್ಲಿ ಗುಲಾಂ ನಬಿ ಆಜಾದ್ ಸಹ ಇದ್ದರು. ಅವರು 2005 ರಿಂದ 2008 ರವರೆಗೆ ಜಮ್ಮು ಮತ್ತು ಕಾಶ್ಮೀರದ ಏಳನೇ ಮುಖ್ಯಮಂತ್ರಿಯಾಗಿದ್ದರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು.

ಗುಲಾಂ ನಬಿ ಆಜಾದ್ ಅವರನ್ನು ಜಮ್ಮು ಕಾಶ್ಮೀರ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ನೇಮಕಾತಿ ಆದೇಶ ಹೊರಬಿದ್ದ ಕೆಲ ಸಮಯದಲ್ಲಿ ಅವರು ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದರು.
ಇತ್ತೀಚೆಗೆ ಪಕ್ಷದ ಜಮ್ಮು ಕಾಶ್ಮೀರ ರಾಜಕೀಯ ವ್ಯವಹಾರ ಸಮಿತಿಗೂ ಆಜಾದ್ ರಾಜೀನಾಮೆ ನೀಡಿದ್ದು, ಈಗ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.
