ಇಸ್ಲಾಮಾಬಾದ್: ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿರುವ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ವಿಷಪ್ರಾಶನದ ಶಂಕೆ ವ್ಯಕ್ತವಾಗಿದೆ. ಆದರೆ, ಈ ಬಗ್ಗೆ ಇನ್ನೂ ದೃಢೀಕರಿಸಲಾಗಿಲ್ಲ.
ಆಸ್ಪತ್ರೆಗೆ ದಾಖಲಾಗಿ ಇಂದಿಗೆ ಎರಡು ದಿನಗಳಾಗಿದ್ದು, ಮಹಡಿಯೊಂದರಲ್ಲಿ ಇದ್ದ ರೋಗಿಗಳನ್ನು ಬೇರೆಡೆಗೆ ಶಿಫ್ಟ್ ಮಾಡಿ ಈನಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದ್ದು, ಬಿಗಿ ಭದ್ರತೆ ಕಲ್ಪಿಸಲಾಗಿದೆ. ನಿಕಟ ಕುಟುಂಬ ಸದಸ್ಯರಿಗೆ ಮಾತ್ರ ಮಹಡಿಗೆ ಪ್ರವೇಶ ನೀಡಲಾಗುತ್ತಿದೆ ಎನ್ನಲಾಗಿದೆ.
ಮುಂಬೈ ಪೊಲೀಸರು ಭೂಗತ ಪಾತಕಿ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಆತನ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಅವರಿಂದ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಭಾರತ ಮತ್ತು ಅಮೆರಿಕದಿಂದ ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಗುರುತಿಸಲ್ಪಟ್ಟಿರುವ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿ ನೆಲೆಸಿದ್ದಾನೆ. ದಾವೂದ್ ಇಬ್ರಾಹಿಂ ತಲೆಗೆ ಎನ್ಐಎ 25 ಲಕ್ಷ ಬಹುಮಾನವನ್ನೂ ಘೋಷಿಸಿದೆ. ಭಾರತಕ್ಕೆ ಬೇಕಾಗಿರುವ ಉಗ್ರರ ಪಟ್ಟಿಯಲ್ಲಿ ದಾವೂದ್ ಇಬ್ರಾಹಿಂ ಅಗ್ರಸ್ಥಾನದಲ್ಲಿದ್ದಾನೆ.