ಕುಂದಾಪುರ : ಇಲ್ಲಿನ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕಳೆದ ಹಲವಾರು ವರ್ಷಗಳಿಂದ ಸರಿಯಾದ ಒಳ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದನ್ನು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿತ್ತು. ಇದೀಗ ಹಾಸ್ಟೆಲ್ ಆವರಣ ಒಳಗೆ ಕೊಳಚೆ ನೀರು ಸಂಗ್ರಹಿಸಿ, ವಿಲೆವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರ ಸಮಸ್ಯೆ ಪರಿಹಾರಗೊಳ್ಳಲಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಇಲ್ಲಿನ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆಶನಿವಾರ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳ ಪರಿಶೀಲನೆ ನಡೆಸಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

ಹಾಸ್ಟೆಲ್ ಕಿಟಕಿ ಹಾಗೂ ಬಾಗಿಲುಗಳ ದುರಸ್ತಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಅನುದಾನದ ಕೊರತೆ ಇದ್ದರೆ ಗಮನಕ್ಕೆ ತರುವಂತೆ ತಿಳಿಸಿದರು. ವಿದ್ಯಾರ್ಥಿಗಳಿಗೆ ಬೆಡ್ಗಳ ಕೊರತೆ ಇದ್ದಲ್ಲಿ, ದಾನಿಗಳನ್ನು ಸಂಪರ್ಕಿಸುವಂತೆ ಸಲಹೆ ನೀಡಿದರು. ಕುಂದಾಪುರ ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿನ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿ-ಗತಿಗಳ ಪರಿಶೀಲನೆ ನಡೆಸಿ, ಸಮಸ್ಯೆಗಳಿಗೆ ಸ್ಪಂದನ ನೀಡುವ ಕಾರ್ಯ ಮಾಡಲಾಗುತ್ತಿದೆ. ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಯಾವುದೆ ಮೂಲಭೂತ ಸೌಕರ್ಯಗಳಿಗೆ ತೊಂದರೆಯಾಗಬಾರದು ಎಂದು ಹೇಳಿದ ಅವರು ಈ ನಿಟ್ಟಿನಲ್ಲಿ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ರಾಜ್ಯದ ವಿವಿಧ ಸಮುದಾಯಗಳಿಂದ ಬಂದಿರುವ ಮೀಸಲಾತಿ ಬೇಡಿಕೆಗಳ ಬಗ್ಗೆ ಹಿಂದುಳಿದ ವರ್ಗಗಗಳ ಆಯೋಗ ಎಲ್ಲ ಆಯಾಮಗಳಿಂದಲೂ ಅಧ್ಯಯನ ನಡೆಸುತ್ತಿದೆ. ಈಗಾಗಲೇ ಬಂದಿರುವ ಬೇಡಿಕೆಗಳ ಕುರಿತು ಸಮಗ್ರ ಅಧ್ಯಯನ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಸರ್ಕಾರದ ಗಂಗಾ ಕಲ್ಯಾಣ ಯೋಜನೆಯಡಿ ಅರ್ಹರಿಗೆ ಬೋರ್ವೆಲ್ ಕೊರೆಯಲು ಅನುದಾನ ಸಿಗದ ಬಗ್ಗೆ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತರಲಾಗುವುದು ಎಂದರು.

ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದ ಅವರು ಸಾರ್ವಜನಿಕರು ನೀಡಿರುವ ಅಹವಾಲುಗಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಪುರಸಭೆಯ ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ಪುರಸಭೆ ಸದಸ್ಯ ಜಿ.ಕೆ. ಗಿರೀಶ್, ತಾಲ್ಲೂಕು ಹಿಂದುಳಿದ ವರ್ಗಗಗಳ ಇಲಾಖೆಯ ಕಲ್ಯಾಣಾಧಿಕಾರಿ ನರಸಿಂಹ ಪೂಜಾರಿ, ವಿದ್ಯಾರ್ಥಿ ನಿಲಯದ ಪಾಲಕ ಶೇಖರ್, ಬಾಲಕಿಯರ ವಿದ್ಯಾರ್ಥಿ ನಿಲಯದ ಪಾಲಕಿ ಆಶಾಲತಾ ಇದ್ದರು.
ವರದಿ : ದಿನೇಶ್ ರಾಯಪ್ಪನಮಠ



