ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಬಿಗ್ ಬಾಸ್ ನ 8 ನೇ ಆವೃತ್ತಿ ಅರ್ಧಕ್ಕೆ ನಿಂತಿತ್ತು. ಇನ್ನೇನು ಸೀಸನ್ 29 ದಿನಗಳಷ್ಟೇ ಬಾಕಿ ಇದ್ದವು. ಆದರೆ ಅರ್ಧದಲ್ಲೇ ಸ್ಪರ್ಧಿಗಳು ಮನೆಯಿಂದ ಹೊರಬರುವಂತಾಗಿತ್ತು. ಇದರಿಂದ ಬಿಗ್ ಬಾಸ್ ಪ್ರಿಯರಿಗೆ ಬೇಸರವಾಗಿತ್ತು. ಸ್ವರ್ತ ಕಲರ್ಸ್ ಕನ್ನಡ ವಾಃಇನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ನೊಂದುಕೊಂಡಿದ್ದರು. ತದನಂತರ ಧಾರವಾಹಿಗಳು ಶೂಟಿಂಗ್ ಅರ್ಧಕ್ಕೆ ನಿಲ್ಲಿಸಿದ್ದ ಕಾರಣ ಧಾರವಾಹಿಗಳು ಇರಲ್ವೋ ಎಂಬ ಕಿರುತೆರೆ ಪ್ರಿಯರ ಮಂದಿಯ ಚಿಂತೆಗೆ ಹೈದರಬಾದ್ ನ ರಾಮೋಜಿ ಫಿಲ್ಮ್ ಸಿಟಿ ಉತ್ತರ ಕೊಟ್ಟಿತ್ತು. ಧಾರವಾಹಿಗಳ ಚಿತ್ರೀಕರಣ ಫಿಲ್ಮ್ ಸಿಟಿಯಲ್ಲಿ ಆಗುತ್ತಿರುವಾಗ, ಯಾಕೆ ಬಿಗ್ ಬಾಸ್ ಮತ್ತೆ ಮಾಡಬಾರದು ಎಂದು ಕೇಳಿದವರೂ ಇದ್ದಾರೆ. ಇದೀಗ ಬಿಗ್ ಬಾಸ್ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ ಪರಮೇಶ್ವರ್ ಗುಂಡ್ಕಲ್. ಇನ್ಸ್ಟಾಗ್ರಾಂ ಪೋಸ್ಟ್ ಮಾಡಿರುವ ಅವರು ಈ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ.

“ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.
ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು.. ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.
ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ 😊” ಎಂದು ಬರೆದಿದ್ದಾರೆ.


































